ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣ
ಅಖಿಲಗುಣ ಸದ್ಧಾಮ ಮಧ್ವನಾಮ || ಪ ||

ಆವ ಕಚ್ಛಪ ರೂಪದಿಂದಲಂಡೋದಕವ
ಓವಿ ಧರಿಸಿದ ಶೇಷಮೂರುತಿಯನು
ಆವವನ ಬಳಿವಿಡಿದು ಹರಿಯ ಸುರರೈಯ್ದುವರು
ಆ ವಾಯು ನಮ್ಮ ಕುಲಗುರುರಾಯನು || ೧ ||

ಆವವನು ದೇಹದೊಳಗಿರಲು ಹರಿ ನೆಲಸಿಹನು
ಆವವನು ತೊಲಗೆ ಹರಿ ತಾ ತೊಲಗುವ
ಆವವನು ದೇಹದಾ ಒಳ ಹೊರಗೆ ನಿಯಾಮಕನು
ಆ ವಾಯು ನಮ್ಮ ಕುಲಗುರುರಾಯನು || ೨ ||

ಕರುಣಾಭಿಮಾನಿ ಸುರರು ದೇಹವ ಬಿಡಲು
ಕುರುಡ ಕಿವುಡ ಮೂಕನೆಂದೆನಿಸುವ
ಪರಮ ಮುಖ್ಯ ಪ್ರಾಣ ತೊಲಗಲಾ ದೇಹವನು
ಅರಿತು ಪೆಣನೆಂದು ಪೇಳುವರು ಬುಧಜನ || ೩ ||

ಸುರರೊಳಗೆ ನರರೊಳಗೆ ಸರ್ವಭೂತಗಳೊಳಗೆ
ಪರತರನೆನಿಸಿ ನಿಯಾಮಿಸಿ ನೆಲಸಿಹ
ಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳು
ಗುರುಕುಲತಿಲಕ ಮುಖ್ಯ ಪವಮಾನನು || ೪ ||

ತ್ರೇತೆಯಲಿ ರಘುಪತಿಯ ಸೇವೆ ಮಾಡುವೆನೆಂದು
ವಾತಸುತ ಹನುಮಂತನೆಂದೆನಿಸಿದ
ಪೋತ ಭಾವದಿ ತರಣಿ ಬಿಂಬಕ್ಕೆ ಲಂಘಿಸಿದ
ಈತಗೆಣೆಯಾರು ಮೂಲೋಕದೊಳಗೆ || ೫ ||

ತರಣಿಗಭಿಮುಖನಾಗಿ ಶಬ್ದಶಾಸ್ತ್ರವ ಪಠಿಸಿ
ಉರವಣಿಸಿ ಹಿಂದುಮುಂದಾಗಿ ನಡೆದ
ಪರಮ ಪವಮಾನ ಸುತ ಉದಯಾಸ್ತ ಶೈಲಗಳ
ಭರದಿಯೈದಿದಗೀತಗುಪಮೆ ಉಂಟೇ || ೬ ||

ಅಖಿಲ ವೇದಗಳ ಸಾರ ಪಠಿಸಿದನು ಮುನ್ನಲ್ಲಿ
ನಿಖಿಳ ವ್ಯಾಕರಣಗಳ ಇವ ಪೇಳಿದ
ಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದು
ಮುಖ್ಯಪ್ರಾಣನನು ರಾಮನನುಕರಿಸಿದ || ೭ ||

ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿ
ಧರಣಿಸುತೆಯಳ ಕಂಡು ಧನುಜರೊಡನೆ
ಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳ
ಉರುಹಿ ಲಂಕೆಯ ಬಂದ ಹನುಮಂತನು || ೮ ||

ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿ
ಶರಧಿಯನು ಕಟ್ಟಿ ಬಲು ರಕ್ಕಸರನು
ಒರಸಿ ರಣದಲಿ ದಶಶಿರನ ಹುಡಿಗುಟ್ಟಿದ
ಮೆರೆದ ಹನುಮಂತ ಬಲವಂತ ಧೀರ || ೯ ||

ಉರಗಬಂಧಕೆ ಸಿಲುಕಿ ಕಪಿವರರು ಮೈಮರೆಯೆ
ತರಣಿಕುಲತಿಲಕನಾಜ್ಞೆಯ ತಾಳಿದ
ಗಿರಿಸಹಿತ ಸಂಜೀವನವ ಕಿತ್ತು ತಂದಿತ್ತ
ಹರಿವರಗೆ ಸರಿಯುಂಟೆ ಹನುಮಂತಗೆ || ೧೦ ||

ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆ
ಭಜಿಸಿ ಮೌಕ್ತಿಕದ ಹಾರವನು ಪಡೆದ
ಅಜಪದವಿಯನು ರಾಮ ಕೊಡೆವೆನೆನೆ ಹನುಮಂತ
ನಿಜ ಭಕುತಿಯನೆ ಬೇಡಿ ವರವ ಪಡೆದ || ೧೧ ||

ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ
ಸೋಮಕುಲದಲಿ ಜನಿಸಿ ಪಾರ್ಥನೊಡನೆ
ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದ
ಆ ಮಹಿಮ ನಮ್ಮ ಕುಲಗುರುರಾಯನು || ೧೨ ||

ಕರದಿಂದ ಶಿಶುಭಾವನಾದ ಭೀಮನ ಬಿಡಲು
ಗಿರವಡಿದು ಶತಶೃಂಗವೆಂದೆನಿತು
ಹರಿಗಳ ಹರಿಗಳಿಂ ಕರಿಗಳ ಕರಿಗಳಿಂ
ಅರೆವ ವೀರರಿಗೆ ಸುರ ನರರು ಸರಿಯೇ || ೧೩ ||

ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿ
ಹಸಿದುರಗಗಳ ಮ್ಯಾಲೆ ಬಿಡಲದನೊರಸಿದ
ಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರ
ಧರಿಸಿ ಜಾಹ್ನವಿಗೊಯ್ದ ತನ್ನನುಜರ || ೧೪ ||

ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರ
ನಿಲ್ಲದೊರಸಿದ ಲೋಕಕಂಟಕರನು
ಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದು
ಎಲ್ಲ ಸುಜನರಿಗೆ ಹರುಷವ ತೋರಿದ || ೧೫ ||

ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿ
ರಾಜಸೂಯಾಗವನು ಮಾಡಿಸಿದನು
ಆಜಿಯೊಳು ಕೌರವರ ಬಲವ ಸವರುವೆನೆಂದು
ಮೂಜಗವರಿಯೆ ಕಂಕಣ ಕಟ್ಟಿದ || ೧೬ ||

ದಾನವರ ಸವರಬೇಕೆಂದು ಬ್ಯಾಗ
ಮಾನನಿಧಿ ದ್ರೌಪದಿಯ ಮನದಿಂಗಿತವನರಿತು
ಕಾನನವ ಪೊಕ್ಕು ಕಿಮ್ಮಾರಾದಿಗಳ ಮುರಿದು
ಮಾನಿನಿಗೆ ಸೌಗಂಧಿಕವನೆ ತಂದ || ೧೭ ||

ದುರುಳ ಕೀಚಕನು ತಾ ದ್ರೌಪದಿಯ ಚೆಲುವಿಕೆಗೆ
ಮರುಳಾಗಿ ಕರಕರಿಯ ಮಾಡಲವನಾ
ಗರಡಿ ಮನೆಯಲಿ ಬರಸಿ ಅವನನ್ವಯವ
ಕುರುಪನಟ್ಟಿದ ಮಲ್ಲಕುಲವ ಸದೆದ || ೧೮ ||

ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿ
ಓರಂತೆ ಕೌರವನ ಮುರಿದು ಮೆರೆದ
ವೈರಿ ದುಶ್ಶಾಸನ್ನ ರಣದಲ್ಲಿ ಎಡಗೆಡಹಿ
ವೀರ ನರಹರಿಯ ಲೀಲೆಯ ತೋರಿದ || ೧೯ ||

ಗುರುಸುತನು ಸಂಗರದಿ ನಾರಾಯಣಾಸ್ತ್ರವನು
ಉರವಣಿಸಿ ಬಿಡಲು ಶಸ್ತ್ರವ ಬಿಸುಟರು
ಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಿಂ
ಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ || ೨೦ ||

ಚಂಡ ವಿಕ್ರಮನು ಗದೆಗೊಂಡು ರಣದಿ ಭೂ
ಮಂಡಲದೊಳಿದಿರಾಂತ ಖಳರನೆಲ್ಲಾ
ಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನು
ಕಂಡು ನಿಲ್ಲುವರಾರು ತ್ರಿಭುವನದೊಳು || ೨೧ ||

ದಾನವರು ಕಲಿಯುಗದೊಳವತರಿಸಿ ವಿಬುಧರೊಳು
ವೇನನ ಮತವನರುಹಲದನರಿತು
ಜ್ಞಾನಿ ತಾ ಪವಮಾನ ಭೂತಳದೊಳವತರಿಸಿ
ಮಾನನಿಧಿ ಮಧ್ವಾಖ್ಯನೆಂದೆನಿಸಿದ || ೨೨ ||

ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿ
ನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದ
ಉರ್ವಿಯೊಳು ಮಾಯೆ ಬೀರಲು ತತ್ತ್ವಮಾರ್ಗವನು
ಓರ್ವ ಮಧ್ವಮುನಿ ತೋರ್ದ ಸುಜನರ್ಗೆ || ೨೩ ||

ಸರ್ವೇಶ ಹರಿ ವಿಶ್ವ ಎಲ್ಲ ತಾ ಪುಸಿಯೆಂಬ
ದುರ್ವಾದಿಗಳ ಮತವ ನೆರೆ ಖಂಡಿಸಿ
ಸರ್ವೇಶ ಹರಿ ವಿಶ್ವ ಸತ್ಯವೆಂದರುಹಿದಾ
ಶರ್ವಾದಿ ಗೀರ್ವಾಣ ಸಂತತಿಯಲಿ || ೨೪ ||

ಬದರಿಕಾಶ್ರಮಕೆ ಪುನರಪಿಯೈದಿ ವ್ಯಾಸಮುನಿ
ಪದಕೆರಗಿ ಅಖಿಳ ವೇದಾರ್ಥಗಳನು
ಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವ
ಯೈದಿದ ಮಧ್ವಮುನಿರಾಯಗಭಿವಂದಿಪೆ || ೨೫ ||

ಜಯ ಜಯತು ದುರ್ವಾದಿಮತತಿಮಿರ ಮಾರ್ತಾ೦ಡ
ಜಯಜಯತು ವಾದಿಗಜಪಂಚಾನನ
ಜಯಜಯತು ಚಾರ್ವಾಕಗರ್ವಪರ್ವತಕುಲಿಶ
ಜಯಜಯತು ಜಗನ್ನಾಥ ಮಧ್ವನಾಥ || ೨೬ ||

ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿ
ಭಂಗವಿಲ್ಲದೆ ಸುಖವ ಸುಜನಕೆಲ್ಲ
ಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕ
ರಂಗವಿಠಲನೆಂದು ನೆರೆ ಸಾರಿರೈ || ೨೭ ||

ಫಲಶ್ರುತಿ (ಜಗನ್ನಾಥದಾಸ ವಿರಚಿತ)

ಸೋಮ ಸೂರ್ಯೋಪರಾಗದಿ ಗೋಸಹಸ್ರಗಳ
ಭೂಮಿದೇವರಿಗೆ ಸುರನದಿಯ ತಟದಿ
ಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕು
ಈ ಮಧ್ವನಾಮ ಬರೆದೋದಿದರ್ಗೆ || ೧ ||

ಪುತ್ರರಿಲ್ಲದವರು ಸತ್ಪುತ್ರರೈದುವರು
ಸರ್ವತ್ರದಲಿ ದಿಗ್ವಿಜಯವಹುದು ಸಕಲ
ಶತ್ರುಗಳು ಕೆಡುವರಪಮೃತ್ಯು ಬರಲಂಜುವುದು
ಸೂತ್ರನಾಮಕನ ಸಂಸ್ತುತಿ ಮಾತ್ರದಿ || ೨ ||

ಶ್ರೀಪಾದರಾಯ ಪೇಳಿದ ಮಧ್ವನಾಮ ಸಂ
ತಾಪಕಳೆದಖಿಲ ಸೌಖ್ಯವನೀವುದು
ಶ್ರೀಪತಿ ಜಗನ್ನಾಥವಿಠಲನ ತೋರಿ ಭವ
ಕೂಪಾರದಿಂದ ಕಡೆ ಹಾಯಿಸುವುದು || ೩ ||

2 thoughts on “ಮಧ್ವನಾಮ –  ಶ್ರೀಪಾದರಾಜ ವಿರಚಿತ”

  1. ಸತ್ಕಾಲದಲ್ಲಿ ಸತ್-ಕೀರ್ತನೆಯನ್ನು ದರ್ಶಿಸಿದಿರಿ. ಧನ್ಯವಾದಗಳು, ತ್ರಿವೇಣಿ. ನನಗೆ ಮೊದಲ ನುಡಿಯಲ್ಲಿಯ ಈ ಸಾಲು ಅರ್ಥವಾಗಲಿಲ್ಲ. ದಯವಿಟ್ಟು ವಿವರಿಸುವಿರಾ;
    ಆವ ಕಚ್ಛಪ ರೂಪದಿಂದಲಂಡೋದಕವ
    ಓವಿ ಧರಿಸಿದ ಶೇಷಮೂರುತಿಯನು|

    1. ಭೂಮಿಯನ್ನು ಹೊತ್ತ ಶೇಷನಿಗೆ ಕೂರ್ಮಾವತಾರದ ಮೂಲಕ ಆಧಾರ ನೀಡಿದ ಶ್ರೀಹರಿಯನ್ನು ಒಲಿಸಲು ಇತರೆಲ್ಲಾ ದೇವತೆಗಳು ವಾಯುದೇವರನ್ನು ಆಶ್ರಯಿಸಬೇಕೆಂದು ಇಲ್ಲಿರುವ ಒಟ್ಟಾರೆ ಅರ್ಥ. ಕಾಕಾ, ನಿಮಗೆ ವಿವರಿಸಲು ಶಕ್ತಳಲ್ಲ. 🙂 ಈ ಲಿಂಕಿನಲ್ಲಿ ಮಧ್ವನಾಮದ ಪದ ಪದಕ್ಕೂ ಅರ್ಥವನ್ನು ವಿವರಿಸಲಾಗಿದೆ. ಸಾಹ್ಯವಾದರೆ ನೋಡಬಹುದು.
      http://madhvamathakritis.blogspot.com/2012/02/madhvanama-by-sripadarajaru.html

Leave a Reply to sritri Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.