ನೆನ್ನೆ ದಿನ
ನನ್ನ ಜನ
ಬೆಟ್ಟದಂತೆ ಬಂದರು
ಕಪ್ಪುಮುಖ ಬೆಳ್ಳಿಗಡ್ಡ ಉರಿಯುತಿರುವ ಕಣ್ಣುಗಳು
ಹಗಲು ರಾತ್ರಿಗಳನು ಸೀಳಿ ನಿದ್ದೆಯನ್ನು ಒದ್ದರು
ಕಂಬಳಿಗಳು ಕೊರಗಿದವು ಎದ್ದೇಳುವ ರೊಚ್ಚಿಗೆ
ಭೂಕಂಪನವಾಯಿತು ಅವರು ಕುಣಿದ ಹುಚ್ಚಿಗೆ
ಇರುವೆಯಂತೆ ಹರಿದಸಾಲು ಹುಲಿಸಿಂಹದ ದನಿಗಳು
ಧಿಕ್ಕಾರ ಧಿಕ್ಕಾರ ಅಸಮಾನತೆಗೆ
ಎಂದೆಂದಿಗು ಧಿಕ್ಕಾರ ಶ್ರೀಮಂತರ ಸೊಕ್ಕಿಗೆ
ಲಕ್ಶಾಂತರ ನಾಗರಗಳು ಹುತ್ತಬಿಟ್ಟು ಬಂದಂತೆ
ಊರತುಂಬ ಹರಿದರು
ಪಾತಾಳಕೆ ಇಳಿದರು
ಆಕಾಶಕೆ ನೆಗೆದರು
ಬೀದಿಯಲ್ಲಿ ಗಲ್ಲಿಯಲ್ಲಿ
ಬೇಲಿಮೆಳೆಯ ಮರೆಗಳಲ್ಲಿ
ಯಜಮಾನರ ಹಟ್ಟಿಯಲ್ಲಿ ಧಣಿಕೂರುವ ಪಟ್ಟದಲ್ಲಿ
ಎಲ್ಲೆಲ್ಲೂ ನನ್ನ ಜನ ನೀರಿನಂತೆ ನಿಂತರು
ಇವರು ಬಾಯಿ ಬಿಟ್ಟೊಡನೆ
ಅವರ ಬಾಯಿ ಕಟ್ಟಿತು
ಇವರ ಕಂಠ ಕೇಳಿದೊಡನೆ
ಅವರ ದನಿ ಇಂಗಿತು
ಕ್ರಾಂತಿಯ ಬಿರುಗಾಳಿಯಲ್ಲಿ ಕೈಬೀಸಿದ ನನ್ನ ಜನ
ಛಡಿಯ ಏಟು ಹೊಡೆದವರ
ಕುತ್ತಿಗೆಗಳ ಹಿಡಿದರು.
ಪೋಲೀಸರ ದೊಣ್ಣೆಗಳು ಏಜೆಂಟರ ಕತ್ತಿಗಳು
ವೇದಶಾಸ್ತ್ರಪುರಾಣ ಬಂದೂಕದ ಗುಡಾಣ
ತರೆಗೆಲೆ ಕಸಕಡ್ಡಿಯಾಗಿ
ತೇಲಿತೇಲಿ ಹರಿದವು
ಹೋರಾಟದ ಸಾಗರಕ್ಕೆ
ಸಾವಿರಾರು ನದಿಗಳು
ಸಿದ್ಧಲಿಂಗಯ್ಯನವರ ಈ ಕವನವನ್ನು ಇಲ್ಲಿ ಹಾಕಿದ್ದಕ್ಕಾಗಿ, ಧನ್ಯವಾದಗಳು.
ಧನ್ಯವಾದಗಳು